ಕಾಂಗ್ರೆಸ್​​ ಹಿರಿಯ ಶಾಸಕಹೆಚ್​. ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ
ಹೆಚ್​. ವೈ. ಮೇಟಿ ಇನ್ನಿಲ್ಲ

ಬೆಂಗಳೂರು :ಮಾಜಿ ಮಂತ್ರಿ ಹೆಚ್​ ವೈ ಮೇಟಿ ನಿಧನ: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾಂಗ್ರೆಸ್​ ಹಿರಿಯ ಶಾಸಕ ಹೆಚ್​. ವೈ. ಮೇಟಿ(79) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದ ಹಿನ್ನಲೆ ಅವರು ಮೃತಪಟ್ಟಿದ್ದಾರೆ. ಶಾಸಕರ ನಿಧನಕ್ಕೆ ಕಾಂಗ್ರೆಸ್​ ನಾಯಕರು ಕಂಬನಿ ಮಿಡಿದಿದ್ದಾರೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H​.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ H​.Y.ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್​ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಗೆದ್ದಿದ್ದರು.

2008ರಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದ ಇವರು 2008ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 2013ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಮೇಟಿ, ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಹೆಚ್​.ವೈ.ಮೇಟಿ, 2023ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಫರ್ಧಿಸಿ ಗೆಲುವಿನ ನಗೆ ಬೀರಿದ್ದರು.

ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ
ಹೆಚ್​.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.

ಉಮಾಶ್ರೀ ಸಂತಾಪ
ಹೆಚ್​.ವೈ.ಮೇಟಿ ಅವರ ನಿಧನಕ್ಕೆ ವಿಧಾನಪರಿಷತ್​ ಸದಸ್ಯೆ ಉಮಾಶ್ರೀ ಸಂತಾಪ ವ್ಯಕ್ತಪಡಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿದ ಅವರು, ಮೇಟಿ ಅವರ ಸಾವಿನ ಸುದ್ದಿ ಕೇಳಿ ನನಗೆ ಆಘಾತ ಆಗಿದೆ. ಎಲ್ಲ ಸಮುದಾಯಗಳನ್ನ ಸಮನಾಗಿ ಕಾಣುತ್ತಿದ್ದ ನಾಯಕರಾಗಿದ್ದ ಅವರು, ಅನೇಕ ಸಮುದಾಯಗಳಿಗೆ ಶಕ್ತಿ ತುಂಬಿದವರಾಗಿದ್ದರು ಎಂದಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *