ರವಿ.ಡಿ.ಚನ್ನಣ್ಣನವರ ವರ್ಗಾವಣೆ ಆದೇಶ ಹಿಂಪಡೆಯುವಂತೆ ಆಗ್ರಹ…

ಗಂಗಾವತಿ.ಫೆ.08: ಐಪಿಎಸ್ ಅಧಿಕಾರಿ ರವಿ.ಡಿ.ಚನ್ನಣ್ಣನವರ್ ಅವರ ವರ್ಗಾವಣೆ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಡಾ.ಕೆ.ಎಂ.ಶರಣಯ್ಯ ಸ್ವಾಮಿ ಆಗ್ರಹಿಸಿದ್ದಾರೆ.ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಶರಣಯ್ಯ ಸ್ವಾಮಿ, ರವಿ.ಡಿ.ಚನ್ನಣ್ಣನವರ್ ಸೇವೆ ಸಲ್ಲಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸುವ ಮೂಲಕ ವಿವಿಧ ಇಲಾಖೆಯಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಇಂತಹ ಪ್ರಾಮಾಣಿಕ, ದಕ್ಷ, ನಿಷ್ಠಾವಂತ ಅಧಿಕಾರಿಗಳ ಸೇವೆಯು ಪೊಲೀಸ್ ಇಲಾಖೆಗೆ ಅಗತ್ಯವಿದೆ. ಆದರೆ ರಾಜ್ಯ ಸರ್ಕಾರವು ಚನ್ನಣ್ಣನವರ ಅವರನ್ನು ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ವರ್ಗಾವಣೆ ಮಾಡಿದೆ. ವಿನಾಕಾರಣ ಈ ರೀತಿ ಸತತವಾಗಿ ಇಲಾಖೆಯಿಂದ ಇಲಾಖೆಗೆ ವರ್ಗಾವಣೆ ಮಾಡುವ ಮೂಲಕ ದಕ್ಷ ಅಧಿಕಾರಿಯ ಮನೋಸ್ಥೈರ್ಯ ಕುಸಿಯುವಂತೆ ಮಾಡುತ್ತಿದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ಚನ್ನಣ್ಣನವರ ವರ್ಗಾವಣೆ ಆದೇಶವನ್ನು ಹಿಂಪಡೆದು, ಈ ಕೂಡಲೇ ಅವರನ್ನು ಹುಬ್ಬಳ್ಳಿ, ಧಾರವಾಡ ಪೊಲೀಸ್ ಕಮಿಷನರೇಟ್ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

