ಬಾಲ್ಯ ವಿವಾಹದ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿತಾಪಂ ಸಹಾಯಕ ನಿರ್ದೇಶಕ ಮಹಾಂತಗೌಡ ಪಾಟೀಲ್ ಹೇಳಿಕೆ…

ಗಂಗಾವತಿ: ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್ ಅವರು ಹೇಳಿದರು.ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ನಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಜಾಗೃತಿ ತರಬೇತಿ ಹಾಗೂ ಘನ ತ್ಯಾಜ್ಯ ನಿರ್ವಹಣೆ ಕುರಿತು ಕಾರ್ಯಾಗಾರದಲ್ಲಿ ಬುಧವಾರ ಮಾತನಾಡಿದರು.ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿ ಇತರೆ ಇಲಾಖೆಗಳು ಸಮನ್ವಯ ಸಾಧಿಸಿ ಬಾಲ್ಯ ವಿವಾಹ ತಡೆಗಟ್ಟುವ ಕೆಲಸ ಮಾಡಬೇಕು. 18 ವರ್ಷದೊಳಗಿನ ಹೆಣ್ಣು ಮಕ್ಕಳ ಮದುವೆ ಮಾಡಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಹಾಗೂ ಬಾಲ್ಯ ವಿವಾಹ ದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಪ್ರೌಢಶಾಲೆ ಹಂತದ ಮಕ್ಕಳಿಗೂ ಈ ಬಗ್ಗೆ ಅರಿವು ಮೂಡಿಸಬೇಕು ಎಂದರು.ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಎಲ್ಲರೂ ಕೈಜೋಡಸಬೇಕು. ಕಸವನ್ನು ಸುಡುವುದರಿಂದ ಪರಿಸರದ ಮೇಲೆ ಅನೇಕ ದುಷ್ಪರಿಣಾಮಗಳು ಆಗುತ್ತಿವೆ. ತಿಪ್ಪೆಗಳು ಮತ್ತು ಚರಂಡಿಗಳಿಗೆ ಸಾರ್ವಜನಿಕರು ಕಸ ಹಾಕಕೂಡದು.

ವೈಜ್ಞಾನಿಕವಾಗಿ ತ್ಯಾಜ್ಯ ವಿಂಗಡಣೆ ಮಾಡಿ ಗ್ರಾಮ ಪಂಚಾಯಿತಿ ಸ್ವಚ್ಛ ವಾಹಿನಿ ವಾಹನಕ್ಕೆ ಹಾಕಬೇಕು ಎಂದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಛಲವಾದಿ ಅವರು ಮಾತನಾಡಿ, ವಡ್ಡರಹಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಹಾಗೂ ಘನ ತ್ಯಾಜ್ಯ ನಿರ್ವಹಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಾಲ್ಯ ವಿವಾಹ ತಡೆಗಟ್ಟುವಿಕೆಯ ಕುರಿತು ಜಾಗೃತಿ ಜಾಥಾ ನಡೆಸಲಾಯಿತು.

ಸಮುದಾಯ ಆರೋಗ್ಯ ಅಧಿಕಾರಿ ಮಾಳಮ್ಮ, ರಾಜೀವ್ ಗಾಂಧಿ ಫೆಲೋ ಸಿಬ್ಬಂದಿ ಸುಮಿತ್ರಾ ಮೆಣಸಿನಕಾಯಿ, ಸಾಹಸ ಸಂಸ್ಥೆಯ ವಲಯ ಮೇಲ್ವಿಚಾರಕರಾದ ಜೋಗದ ಮಂಜುನಾಥ, ಸಂಪತ್ ಕುಮಾರ್, ಎನ್ ಆರ್ ಎಲ್ ಎಂ ಕೀರ್ತಿ, ಗ್ರಾಪಂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

