ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿ : ಶಿರಸಿ ಎಸಿ ಕಾವ್ಯರಾಣಿ..

ಬಳ್ಳಾರಿ/ ಕಂಪ್ಲಿ : ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಜೊತೆಗೆ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರತಿಯೊಂದು ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಶಿರಸಿ ಎಸಿ, ಕಂಫ್ಲಿ ತಾಲೂಕು ನೋಡಲ್ ಅಧಿಕಾರಿ ಕಾವ್ಯರಾಣಿ ಕೆ.ವಿ ಹೇಳಿದರು. ಪಟ್ಟಣದ ಅತಿಥಿ ಗೃಹದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಮೂರುನಾಲ್ಕು ಸಭೆ ಮಾಡಿದ್ದೇವೆ. ಕಂಫ್ಲಿ ಪುರಸಭೆಯ ಘನತ್ಯಾಜ್ಯ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಪ್ರತಿಯೊಂದು ನಾಗರಿಕರು ಹಸಿ ಮತ್ತು ಒಣ ಕಸ ವಿಂಗಡಿಸಿ, ಪುರಸಭೆಯ ವಾಹನಕ್ಕೆ ಹಾಕಬೇಕು. ಕಂಪ್ಲಿ ತಾಲೂಕಿನಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಫಲಿತಾಂಶ ಕಡಿಮೆ ಬಂದಿದೆ. ಆದ್ದರಿಂದ ಈ ಸಲ ಫಲಿತಾಂಶ ಹೆಚ್ಚಿಸುವ ಸಲುವಾಗಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಹೆಚ್ಚುವರಿ ತರಗತಿ, ಮೋಟಿವೇಶನ್ ಸೇರಿದಂತೆ ಇನ್ನಿತರದಲ್ಲಿ ಮಕ್ಕಳ ಕಲಿಕೆ ಹೆಚ್ಚಿಸಿ, ಮುಂದಿನ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚಿನ ಫಲಿತಾಂಶ ತರುವ ನಿಟ್ಟಿನಲ್ಲಿ ಶ್ರಮಿಸಬೇಕಾಗಿದೆ. ಆದ್ದರಿಂದ ಕಂಪ್ಲಿ ತಾಲೂಕಿನಲ್ಲಿರುವ 60 ಪೌಢ ಶಾಲೆಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ, ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಗುರುತಿಸಿ, ಮಕ್ಕಳ ಕಲಿಕೆಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಕೈಗೊಂಡ ರೂಪುರೇಷಗಳನ್ನು ಕಂಪ್ಲಿ ತಾಲೂಕಿನಲ್ಲಿ ಅನುಷ್ಠಾನಕ್ಕೆ ತಂದು, ಎಸ್ಸೆಸ್ಸೆಲ್ಸಿಯಲ್ಲಿ ಫಲಿತಾಂಶ ಬದಲಾವಣೆ ತರಲು ನಿರ್ಧರಿಸಲಾಗಿದೆ. ಸೋಮಪ್ಪ ಕೆರೆ ಅಂಗಳದ ಫುಟ್ಬಾತ್ನಲ್ಲಿ ಮಹಿಳೆಯರು ಸೇರಿದಂತೆ ಅನೇಕ ಜನರು ವಾಯು ವಿವಾರಕ್ಕೆ ಬರುತ್ತಾರೆ. ಆದರೆ, ಇಲ್ಲಿನ ಕೆರೆ ದಡದಲ್ಲಿ ಸ್ವಚ್ಚತೆ ಕಡಿಮೆ ಇರುವುದರಿಂದ ಸ್ವಚ್ಚತಾ ದೃಷ್ಠಿಯಿಂದ ಮುಂದಿನ ದಿನದಲ್ಲಿ ಸಂಬಂಧಿಸಿದ ಇಲಾಖೆಗಳ ನೇತೃತ್ವದಲ್ಲಿ ಶ್ರಮದಾನ ಮಾಡುವ ಮೂಲಕ ಸ್ವಚ್ಚತಾ ಜಾಗೃತಿ ಮೂಡಿಸಲಾಗುವುದು. ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀರೋಗ ತಜ್ಞರ ಅವಶ್ಯಕತೆ ಇರುವುದರಿಂದ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಸ್ತ್ರೀರೋಗ ತಜ್ಞರನ್ನು ನೇಮಿಸಲು ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ, ತಾಪಂ ಇಒ ಆರ್.ಕೆ.ಶ್ರೀಕುಮಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ವರದಿ : ಜಿಲಾನಸಾಬ್ ಬಡಿಗೇರ್
