ತಿಪ್ಪೆಗುಂಡಿಗೆ ಸೇರಿದ ಪೌಷ್ಟಿಕ ಆಹಾರ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ದಿವ್ಯ ನಿರ್ಲಕ್ಷ್ಯ : ಹನುಮಂತ ಕಂಬಾರ್ ಆರೋಪ….

ಗಂಗಾವತಿ, ಮಾರ್ಚ್ 24:ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿತರಿಸಬೇಕಾದ ಪೌಷ್ಟಿಕ ಆಹಾರ ತಿಪ್ಪೆಗುಂಡಿಗೆ ಸೇರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ದಿವ್ಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಗಂಗಾವತಿ ತಾಲೂಕು ಅಧ್ಯಕ್ಷ ಹನುಮಂತ ಕಂಬಾರ್ ಆರೋಪಿಸಿದರು.ರಾಜ್ಯ ಸರ್ಕಾರ ಅಪೌಷ್ಟಿಕತೆಯನ್ನು ತಡೆಗಟ್ಟುವ ಉದ್ದೇಶದಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡುವ ಯೋಜನೆ ಜಾರಿಗೆ ತಂದಿದೆ. ಆದರೆ ಗಂಗಾವತಿ ನಗರದ ಬೈಪಾಸ್ ರಸ್ತೆಯ ಭಾಗದಲ್ಲಿ ಪೌಷ್ಟಿಕ ಆಹಾರ ಸರಿಯಾಗಿ ವಿತರಣೆ ಆಗದೇ ತಿಪ್ಪೆಗುಂಡಿಗೆ ಸೇರುವಂತಹ ದುಸ್ಥಿತಿ ಉಂಟಾಗಿದೆ ಎಂದು ಅವರು ದೂರಿದರು.ಈ ರೀತಿಯ ನಿರ್ಲಕ್ಷ್ಯದಿಂದ ಸರ್ಕಾರದ ಉತ್ತಮ ಯೋಜನೆಗೆ ಕೆಟ್ಟ ಹೆಸರು ತರುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಕ್ಕಳ ಆರೋಗ್ಯದ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಹನುಮಂತ ಕಂಬಾರ್ ಎಚ್ಚರಿಕೆ ನೀಡಿದರು.ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

