ಪರಿಶಿಷ್ಟ ಜಾತಿಯ ಹಿರಿಯ ರಾಜಕಾರಣಿಯಾದ ಕೆ.ಹೆಚ್. ಮುನಿಯಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲು ಒತ್ತಾಯ: ಯಲ್ಲಪ್ಪ ಕಟ್ಟಿಮನಿ.

ಕಾರಟಗಿ: ರಾಜ್ಯದಲ್ಲಿ ಪ್ರಸ್ತುತ ಆಹಾರ ಇಲಾಖೆ ಸಚಿವರಾಗಿರುವ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದವರಾಗಿದ್ದು, ಇವರು ಒಬ್ಬ ಹಿರಿಯ ಕಾಂಗ್ರೆಸ್ ನಾಯಕರಾಗಿ, ಸತತ ಏಳು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಹಾಗೂ ರಾಜ್ಯದಲ್ಲಿಯೂ ಶಾಸಕರಾಗಿ, ಮಂತ್ರಿಯಾಗಿ ಸೇವೆ ಮಾಡುತ್ತಿದ್ದಾರೆ. ಇವರ ಆಡಳಿತಾವಧಿಯಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೇ ನಿಷ್ಠಾವಂತ ರಾಜಕಾರಣಿಯಾಗಿ ಸಾರ್ವಜನಿಕರ ಜನಾನುರಾಗಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಕ್ಷಕ್ಕೆ ಪ್ರಾಮಾಣಿಕತೆಯಿಂದ ನಿಷ್ಠಾವಂತ ನಾಯಕರಾದ ಇವರನ್ನು ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡುವ ಮೂಲಕ ನಾಡಿನಲ್ಲಿ ಇನ್ನಷ್ಟು ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸುತ್ತದೆ ಎಂದು ಸಮಿತಿಯ ರಾಜ್ಯಾಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಮಾದಿಗ ಸಮುದಾಯ ತುಳಿತಕ್ಕೊಳಗಾಗಿ ಸಮಾಜದ ಸಮಾನತೆಯಲ್ಲಿ ತೀರಾ ಹಿಂದುಳಿದ ಸಮುದಾಯವಾಗಿದೆ. ಈ ಸಮುದಾಯದ ನಾಯಕರಾದ ಕೆ.ಹೆಚ್. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದರಿಂದ ಮಾದಿಗ ಸಮುದಾಯಕ್ಕೆ ನ್ಯಾಯಸಿಕ್ಕಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
