ಒಕ್ಕೂಟದ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಿ : ಪಿಡಿಒ ಹಾರ್ವಿ ಶೇಷಗಿರಿ….

ಕಂಪ್ಲಿ: ಮಹಿಳೆಯರು ಸ್ವಾವಲಂಬಿಗಳಾಗಿ ಆದಾಯಗಳಿಸುವುದರಿಂದ ಮನೆ ಬೆಳಗುತ್ತದೆ ಮತ್ತು ಸಮಾಜ ಬೆಳೆಯುತ್ತದೆ ಎಂದು ಪಿಡಿಒ ಹಾರ್ವಿ ಶೇಷಗಿರಿ ಹೇಳಿದರು. ತಾಲೂಕಿನ ಎಮ್ಮಿಗನೂರು ಗ್ರಾಪಂಯ ಕಛೇರಿ ಆವರಣದಲ್ಲಿ ಎಮ್ಮಿಗನೂರು ಜಡೆಸಿದ್ದೇಶ್ವರ ಸಂಜೀವಿನಿ ಗ್ರಾಪಂ ಮಟ್ಟದ ಮಹಿಳಾ ಒಕ್ಕೂಟದ ನೇತೃತ್ವದಲ್ಲಿ ಗ್ರಾಪಂ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ ಹಾಗೂ ಮಾದಕ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಸರ್ಕಾರ ಮಹಿಳೆಯರಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದಿಂದ ಮಹಿಳೆಯರ ಸಬಲೀಕರಣ ಮಾಡುವ ಉದ್ದೇಶದಿಂದ ಸರ್ಕಾರ ಸಂಜೀವಿನಿ ಯೋಜನೆ ಜಾರಿಗೆ ತಂದಿದೆ. ಮಹಿಳೆಯರು ತಮ್ಮ ಬಡತನವನ್ನು ಹೋಗಲಾಡಿಸಲು ಸ್ವ-ಸಹಾಯ ಸಂಘಗಳ ಮೂಲಕ ಸಂಘಟಿತರಾಗಬೇಕು. ಯೋಜನೆಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಮತ್ತು ಯುವ ಸಮೂಹ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿದ್ದು, ಅದರ ಬಗ್ಗೆ ಹೆಚ್ಚಿನ ಜಾಗೃತಿವಹಿಸಿ, ಮಾದಕ ಮುಕ್ತ ಗ್ರಾಮವನ್ನಾಗಿ ಮಾಡಬೇಕಾಗಿದೆ ಎಂದರು. ಒಕ್ಕೂಟದ ಅಧ್ಯಕ್ಷೆ ವೈ.ರೇಣುಕಮ್ಮ ಮಾತನಾಡಿ, ಮಹಿಳೆಯರು ಸ್ವಾವಲಂಬನೆಯ ಬದುಕಿನೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಸಮುದಾಯ ಮಟ್ಟದಲ್ಲಿ ಈ ರೀತಿಯ ಕಾರ್ಯಕ್ರಮಗಳಿಂದ ಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ತಿಳುವಳಿಕೆ ಮತ್ತು ಜಾಗೃತಿ ಮೂಡಿಸಿದಾಗ ಮಾತ್ರ ತಡೆಗಟ್ಟು ಸಾಧ್ಯವಾಗುತ್ತದೆ ಎಂದರು. ತಾಲೂಕು ಸಂಪನ್ಮೂಲ ವ್ಯಕ್ತಿ ಶ್ರೀಗೌರಿ ಮಾತನಾಡಿ, ಆಧುನಿಕ ಯುಗದಲ್ಲಿ ಮಹಿಳೆಯ ಪಾತ್ರ ಅಪಾರವಾಗಿದ್ದು, ಅದರಲ್ಲೂ ಗ್ರಾಮೀಣ ಮಹಿಳೆಯರು ಅನೇಕ ಸವಾಲು ಎದುರಿಸಬೇಕಾಗಿದೆ. ಆದ್ದರಿಂದ ಇಂತಹ ಒಕ್ಕೂಟದ ಮೂಲಕ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದರು. ತಾಲೂಕು ಮಹಿಳಾ ಒಕ್ಕೂಟದ ಸಂಯೋಜಕಿ ಪಾರ್ವತಿ ಮಾತನಾಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷೆ ಮಂಜುಳಾ, ಕಾರ್ಯದರ್ಶಿ ದ್ಯಾವಮ್ಮ, ಖಜಾಂಚಿ ಲಕ್ಷ್ಮಿ ಸೇರಿದಂತೆ ಮಹಿಳೆಯರು, ಸ್ವ-ಸಹಾಯ ಸಂಘಗಳ ಮಹಿಳಾ ಪ್ರತಿನಿಧಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್
